ಬಹುಕೋಟಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರು, ತಮಗೆ ಉತ್ತಮ ರಾಜಕೀಯ ಭವಿಷ್ಯ ಇದ್ದು, ಮುಖ್ಯಮಂತ್ರಿಯಾಗುವ ಅವಕಾಶ ಇದೆ ಎಂದು ಗುರುವಾರ ಹೇಳಿದ್ದಾರೆ.
ತಮ್ಮ ವಿರುದ್ಧ 18 ಕ್ರಿಮಿನಲ್ ಪ್ರಕರಣಗಳಿವೆ ಎಂಬ ಶಾಸಕ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ನಾಗೇಂದ್ರ, 100 ಕ್ರಿಮಿನಲ್ ಕೇಸ್ ಇರುವವರು ಮುಖ್ಯಮಂತ್ರಿಯಾದ ಉದಾಹರಣೆಗಳಿವೆ ಎಂದು ತಿರುಗೇಟು ನೀಡಿದರು.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ 89.63 ಕೋಟಿ ರೂ. ಹಗರಣ ಬೆಳಕಿಗೆ ಬಂದ ನಂತರ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿತ್ತು. ಮೂರೂವರೆ ತಿಂಗಳ ಬಳಿಕ ಬುಧವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.