ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಾಣಂತಿಯರ ಸಾವಿಗೆ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ಬಳಕೆ ಕಾರಣವೇ ಎಂಬುದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ. ಆದರೂ ಅನುಮಾನದಿಂದ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು
ರಿಂಗಲ್ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ನ್ನು ಈ ಹಿಂದಿನಿಂದಲೂ ಆಸ್ಪತ್ರೆಗಳಲ್ಲಿ ಬಳಕೆ ಮಾಡುತ್ತಾ ಬರಲಾಗುತ್ತಿದೆ. ಈ ಬಾರಿಯೂ ಔಷಧ ಸರಬರಾಜು ನಿಗಮಕ್ಕೆ 192 ಬ್ಯಾಚ್ ಗಳಲ್ಲಿ ಐವಿ ದ್ರಾವಣ ಪೂರೈಕೆಯಾಗಿತ್ತು. ಇದರ ಬಳಕೆ ಸಂದರ್ಭದಲ್ಲಿ ಎರಡು ಬ್ಯಾಚ್ ಗಳ ಬಗ್ಗೆ ಕೆಲವು ಅನುಮಾನಗಳು ವ್ಯಕ್ತವಾದಾಗ ಮುಂಜಾಗ್ರತೆ ದೃಷ್ಟಿಯಿಂದ ಸಂಪೂರ್ಣವಾಗಿ ಎಲ್ಲ 192 ಬ್ಯಾಚ್ ಗಳ ದ್ರಾವಣವನ್ನು ಆಸ್ಪತ್ರೆಗಳಲ್ಲಿ ಬಳಸದಂತೆ ತಡೆಹಿಡಿಯಲಾಗಿತ್ತು. ಬಳಿಕ ಸೆಂಟ್ರಲ್ ಡ್ರಗ್ ಲ್ಯಾಬೊರೇಟರಿಯಲ್ಲಿ ಪರೀಕ್ಷೆ ನಡೆಸಿದಾಗ ದ್ರಾವಣ ಬಳಸಬಹುದು ಎಂಬ ವರದಿ ಬಂದಿತ್ತು ಎಂದು ತಿಳಿಸಿದರು.